ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ

0

ಸೀತಾರಾಮ ರೈಯವರ ಅಮೃತರಶ್ಮಿ ಅಭಿನಂದನಾ ಗ್ರಂಥ ಬಿಡುಗಡೆ

ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ನೂತನವಾಗಿ ಆರಂಭಗೊಂಡಿರುವ ಅಟಲ್ ಟಿಂಕರಿಂಗ್ ಲ್ಯಾಬ್‌ನ ಉದ್ಘಾಟನೆ ಮತ್ತು ಸವಣೂರು ಸೀತಾರಾಮ ರೈಗಳ ಬದುಕಿನ ಅಮೃತ ಮಹೋತ್ಸವದ ಅಂಗವಾಗಿ ಹೊರತರಲಾದ ಅಭಿನಂದನಾ ಗ್ರಂಥದ ಬಿಡುಗಡೆ ಸಮಾರಂಭವು ಇಂದು ಸಂಸ್ಥೆಯ ಸಭಾಭವನದಲ್ಲಿ ನಡೆಯಿತು.


ರಾಜ್ಯ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಲ್ಯಾಬ್ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸದ ನಳಿನ್‌ಕುಮಾರ್ ಕಟೀಲ್ ಅಮೃತರಶ್ಮಿ ಅಭಿನಂದನಾ ಗ್ರಂಥವನ್ನು ಬಿಡುಗಡೆಗೊಳಿಸಿದರು.


ಇದೇ ಸಂದರ್ಭದಲ್ಲಿ ಅಭಿನಂದನಾ ಗ್ರಂಥದ ಪ್ರಧಾನ ಸಂಪಾದಕ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಆಯ್ಕೆಗೊಂಡಿರುವ ಹಿರಿಯ ಪತ್ರಕರ್ತ ಪಿ.ಬಿ. ಹರೀಶ್ ರೈಯವರನ್ನು ಸನ್ಮಾನಿಸಲಾಯಿತು.

ಸವಣೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರಾಜೀವಿ ವಿ. ಶೆಟ್ಟಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಅಟಲ್ ಟಿಂಕರಿಂಗ್ ಲ್ಯಾಬ್‌ನ ದ.ಕ. ಜಿಲ್ಲಾ ನೋಡೆಲ್ ಆಫೀಸರ್ ಶ್ರೀಮತಿ ಜಯಲಕ್ಷ್ಮಿ ಮುಖ್ಯ ಅತಿಥಿಗಳಾಗಿದ್ದರು.

ಸವಣೂರು ಸೀತಾರಾಮ ರೈ ಸ್ವಾಗತಿಸಿ, ವಿದ್ಯಾರಶ್ಮಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸೀತಾರಾಮ ಕೇವಳ ವಂದಿಸಿದರು. ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ, ಎನ್. ಸುಂದರ ರೈ ಸವಣೂರು, ಪದವಿ ಕಾಲೇಜು ಪ್ರಾಂಶುಪಾಲ ನಾರಾಯಣ ಮೂರ್ತಿ, ರಶ್ಮಿ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.