ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ

0

ಮಂಗಳೂರು: ಸರಳ, ಸಜ್ಜನಿಕೆಯ ಹೆಸರಾಂತ ವೈದ್ಯರಾದ ಡಾ.ಧನಂಜಯ ಸರ್ಜಿ ಅವರಂತಹ ಪ್ರಾಮಾಣಿಕ ವ್ಯಕ್ತಿಗಳ ಅವಶ್ಯಕತೆ ಇಂದು ರಾಜಕಾರಣಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.


ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಇಲ್ಲಿನ ಸುಧೀಂದ್ರ ಹಾಲ್ ನಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಡಾ.ಸರ್ಜಿ ಅವರು ಹೊಟ್ಟೆಪಾಡಿಗಾಗಿ ರಾಜಕಾರಣಕ್ಕೆ ಬಂದವರಲ್ಲ, ಅವರ ಸೇವಾಮನೋಭಾವ ಮತ್ತು ಸಂಘಟನಾ ಶಕ್ತಿಯನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿದೆ, ಪದವೀಧರರ ಎಲ್ಲ ಸಮ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡುಕೊಳ್ಳುವ ಶಕ್ತಿ ಅವರಿಗಿದೆ, ಅಲ್ಲದೇ ಪಕ್ಷ ಸಂಘಟನೆಯೂ ಬಲಗೊಳಿಸಲು ಅವರು ಶ್ರಮಿಸಲಿದ್ದಾರೆ, ಹಾಗೆಯೇ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ್ರು ಒಬ್ಬ ನುರಿತ ಹಿರಿಯ ರಾಜಕಾರಣಿ, ಅವರು ತಮ್ಮದೇ ಆದ ಹಿಡಿತವನ್ನು ಇಟ್ಟುಕೊಂಡಿದ್ದಾರೆ, ಶಿಕ್ಷಕರ ಸಮಸ್ಯೆಗಳಿಗೆ ಎಲ್ಲ ರೀತಿಯಲ್ಲೂ ಸ್ಪಂದಿಸಲಿದ್ದಾರೆ, ಪರಿಷತ್ ನಲ್ಲಿ ಗಟ್ಟಿ ಧ್ವನಿಯಾಗಲಿದ್ದಾರೆ, ಹಾಗಾಗಿ ಇಬ್ಬರೂ ಅಭ್ಯರ್ಥಿಗಳನ್ನು ಗಹೆಚ್ಚು ಮತಗಳ ಅತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.


ದಕ್ಷಿಣ ಕನ್ನಡ ಎಂದರೆ ಅದು ಪ್ರಾಮಾಣಿಕತೆಗೆ ಮತ್ತೊಂದು ಹೆಸರು. ಇತ್ತೀಚೆಗೆ ಲೋಕಸಭಾ ಚುನಾವಣೆಯನ್ನು ಜೆಡಿಎಸ್ ಮತ್ತು ಬಿಜೆಯ ಹೊಂದಣಿಕೆಯಲ್ಲಿ ಯಶಸ್ವಿಯಾಗಿ ಮುಗಿಸಿದ್ದೇವೆ, ನರೇಂದ್ರ ಮೋದಿ ಜೀ ಅವರು ಮತ್ತೊಮ್ಮೆ ಪ್ರಾನಿ ಆಗಬೇಕು, ಇದು ಜೆಡಿಎಸ್ ವರಿಷ್ಠರಾದ ದೇವೇಗೌಡರ ಆಶಯ ಕೂಡ. ಹಾಗೆಯೇ ವಿಕಾಸ್ ಪುತ್ತೂರ್ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರೂ ಪಕ್ಷ ಗುರುತಿಸಿ ಟಿಕೆಟ್ ನೀಡಿದ ಅಭ್ಯರ್ಥಿಯ ಗೆಲುವಿಗೆ ಹಗಲಿರುಳು ಶ್ರಮಿಸುತ್ತಿರುವುದು ಅಭಿನಂದನೀಯ ಎಂದರು.


ರಾಜ್ಯದ ಆಡಳಿತ ಹಳಿ ತಪ್ಪಿದ್ದು, ಎಲ್ಲ ಕ್ಷೇತ್ರದಲ್ಲೂ ಅಭಿವೃದ್ಧಿ ಸಂಪೂರ್ಣ ಸ್ಥಗಿತಗೊಂಡಿದೆ, ಹಿಂದಿನ ಅವಧಿಯಲ್ಲಿ ಬಿಜೆಪಿ ಸರಕಾರ ಕೈಗೊಂಡ ಕಾಮಗಾರಿಗಳು ಹಾಗೂ ಯೋಜನೆಗಳನ್ನು ನಿಲ್ಲಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆಎಂದು ಆಪಾದಿಸಿದರು.


ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡರು ಮಾತನಾಡಿ, ಎಲ್ಲ ಕಾರ್ಯಕರ್ತರು ತಮ್ಮ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು.


ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್, ರಾಜ್ಯ ಬಿಜೆಪಿ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್ ದತ್ತಾತ್ರಿ , ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ, ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಎಸ್. ಎಲ್. ಭೋಜೇಗೌಡ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರೀಜೇಶ್ ಚೌಟ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಂಟವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯಕ್, ಮೂಡಬಿದರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉಮಾನಾಥ್ ಕೋಟ್ಯಾನ್, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯಾ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ತಮ್ಮೇಶ್ ಗೌಡ, ಶರಣು ತಳ್ಳಿಕೆರೆ , ಹಿರಿಯರಾದ ಬಾಲಕೃಷ್ಣ ಭಟ್, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರ್, ಉಪಮೇಯರ್ ಸುನಿತಾ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಡಾ ಮಂಜುಳಾ ರಾವ್, ಮಂಗಳೂರು ವಿಭಾಗದ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಸಹ ಪ್ರಭಾರಿಗಳಾದ ರಾಜೇಶ್ ಕಾವೇರಿ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.