ಸುಳ್ಯದಲ್ಲಿ 67 ನೇ ಕನ್ನಡ ರಾಜ್ಯೋತ್ಸವ

0

 

ಆಕರ್ಷಕ ಪಥಸಂಚಲನ : ಸಾಂಸ್ಕೃತಿಕ ವೈವಿಧ್ಯ

ಕನ್ನಡ ವಿಷಯದಲ್ಲಿ ಅತ್ಯುತ್ತಮ ಅಂಕಗಳಿಸಿದ 64 ವಿದ್ಯಾರ್ಥಿಗಳಿಗೆ ಗೌರವ

 

ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ನ.1 ರಂದು ಸುಳ್ಯ‌ ಸರಕಾರಿ ಪದವಿ ಪೂರ್ವ ‌ಕಾಲೇಜು ಮೈದಾನದಲ್ಲಿ ನಡೆಯಿತು.

ತಹಶೀಲ್ದಾರ್ ಕು.ಅನಿತಾಲಕ್ಷ್ಮೀ ಯವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಬಳಿಕ ಕನ್ನಡ ಧ್ವಜಾರೋಹಣ ನೆರವೇರಿಸಿದರು. ‌ಬಳಿಕ ಮಾತನಾಡಿದ ಅವರು “ಕನ್ನಡ ನಮ್ಮೆಲ್ಲರ ಜೀವದ ಭಾಷೆ. ಭಾಷೆಯ ಗಣತೆಯನ್ನು ಎಲ್ಲರೂ ಕಾಪಾಡುವುದರ ಜತೆಗೆ ಕನ್ನಡದ ಸಂಪ್ರದಾಯ – ಸಂಸ್ಕೃತಿ ಯನ್ನು ಮಕ್ಕಳಿಗೆ ತಿಳಿಸುವ ಕೆಲಸ ಮಾಡೋಣ. ಕನ್ನಡವನ್ನು ಪ್ರೀತಿಸುವುದರ ಜತೆಗೆ ಇತರ ಭಾಷೆಯನ್ನು ಗೌರವಿಸೋಣ” ಎಂದು ಹೇಳಿದರು.

ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಅಧ್ಯಕ್ಷತೆ ವಹಿಸಿದ್ದರು. “ಕನ್ನಡ ಬೆಳಗುವ ಕಿಚ್ಚು ಕನ್ನಡದ ಎಲ್ಲರಲ್ಲಿಯೂ ಬರಬೇಕು” ಎಂದು‌ ಹೇಳಿದರು.

ತಾಲೂಕು ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ಮಾತನಾಡಿ, ತಾಲೂಕಿನಲ್ಲಿ ಕನ್ನಡಕ್ಕಾಗಿ ಸೇವೆ ಸಲ್ಲಿಸಿದವರು ಹಲವರಿದ್ದಾರೆ. ಈ ಹಿಂದೆ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡಕ್ಕಾಗಿ ಸೇವೆ ಸಲ್ಲಿಸಿದವರಿಗೆ ತಾಲೂಕು ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿತ್ತು. ಆದರೆ ಈಗ ಅದನ್ನು ನಿಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಕನ್ನಡಕ್ಕಾಗಿ ದುಡಿದವರಿಗೆ ತಾಲೂಕು ಮಟ್ಟದಲ್ಲಿ ಪ್ರಶಸ್ತಿ ನೀಡುವ ಕೆಲಸ ಆಗಬೇಕು” ಎಂದು ವಿನಂತಿಸಿದರು.

ಸುಳ್ಯ ನ.ಪಂ. ಮಾಜಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ನ.ಪಂ. ಸದಸ್ಯ ಬಾಲಕೃಷ್ಣ ಭಟ್ ಕೊಡೆಂಕಿರಿ, ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ, ನ.ಪಂ. ಮುಖ್ಯಾಧಿಕಾರಿ ಸುಧಾಕರ್, ಸಿಡಿಪಿಒ ಶ್ರೀಮತಿ ರಶ್ಮಿ ಅಶೋಕ್ ನೆಕ್ರಾಜೆ, ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಮೋಹನ್ ಗೌಡ ಬೊಮ್ಮೆಟ್ಟಿ, ಉಪಪ್ರಾಂಶುಪಾಲ ಪ್ರಕಾಶ ಮೂಡಿತ್ತಾಯ, ಸರಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ, ಸುಳ್ಯ ರೇಂಜರ್ ಗಿರೀಶ್ ಆರ್ ವೇದಿಕೆಯಲ್ಲಿದ್ದರು.

ಎಸ್.ಎಸ್.ಎಲ್.ಸಿ.ಯಲ್ಲಿ ಕನ್ನಡ ವಿಷಯದಲ್ಲಿ 125ರಲ್ಲಿ 125 ಅಂಕಗಳಿಸಿದ 64 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

 

ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್ ಸ್ವಾಗತಿಸಿದರು. ಶಿಕ್ಷಣ ಸಂಯೋಜಕಿ ಶ್ರೀಮತಿ ನಳಿನಿ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಶಿಕ್ಷಣ ಸಂಯೋಜಕ ಚಂದ್ರಶೇಖರ ಹಾಗೂ ಶ್ರೀಮತಿ ಮಮತಾ ಕಾರ್ಯಕ್ರಮ ನಿರೂಪಿಸಿದರು.

ಆಕರ್ಷಕ ಪಥ ಸಂಚಲನ ನಡೆಯಿತು. ಪೋಲೀಸ್, ಗೃಹರಕ್ಷಕ, ಎನ್.ಸಿ.ಸಿ., ಸ್ಕೌಟ್ ಗೈಡ್ಸ್ ಸಹಿತ ನಗರದ ವಿವಿಧ ಶಾಲಾ ವಿದ್ಯಾರ್ಥಿಗಳು ಪಥ ಸಂಚಲನದಲ್ಲಿ ಭಾಗವಹಿಸಿದರು.

ಸಭಾ ಕಾರ್ಯಕ್ರಮ ದ ಬಳಿಕ ಮೈದಾನದಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಿತು.