ಕೊಯನಾಡು: ಮತ್ತೆ ಹೆದ್ದಾರಿ ಕುಸಿಯುವ ಭೀತಿ ಹಿನ್ನೆಲೆ ರಸ್ತೆ ಬಂದ್

0

ತಾತ್ಕಾಲಿಕ ರಸ್ತೆ ಮೂಲಕ ವಾಹನ ಸಂಚಾರಕ್ಕೆ ವ್ಯವಸ್ಥೆ

ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಅರಣ್ಯ ಇಲಾಖಾ ಕಛೇರಿಯ ಬಳಿ ಮತ್ತೆ ಹೆದ್ದಾರಿ ಕುಸಿಯುವ ಭೀತಿ ಎದುರಾಗಿದ್ದು, ಬ್ಯಾರಿಕೇಡ್ ಅಳವಡಿಸಿ ಮತ್ತೆ ರಸ್ತೆ ಬಂದ್ ಮಾಡಲಾಗಿದ್ದು, ಮುಖ್ಯ ರಸ್ತೆಯ ಬದಿಯಲ್ಲಿ ಕಳೆದ ಬಾರಿ ನಿರ್ಮಾಣ ಮಾಡಿದ್ದ ತಾತ್ಕಾಲಿಕ ರಸ್ತೆ ಮೂಲಕ ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಕಳೆದ ವರ್ಷದ ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ಬಿರುಕು ಕಾಣಿಸಿಕೊಂಡ ಕಾರಣ ಬ್ಯಾರಿಕೇಡ್ ಅಳವಡಿಸಿ, ರಸ್ತೆ ಬಂದ್ ಮಾಡಿ, ಮುಖ್ಯ ರಸ್ತೆಯ ಬದಿಯಲ್ಲಿ ಜೆಸಿಬಿ ಮೂಲಕ ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಲಾಗಿತ್ತು.


ಈ ತಾತ್ಕಾಲಿಕ ರಸ್ತೆಯಲ್ಲಿಯೇ ಕಳೆದೊಂದು ವರ್ಷದಿಂದ ವಾಹನ ಸಂಚಾರ ನಡೆಯುತ್ತಿತ್ತು. ಆದರೆ ಕಳೆದ ಎರಡು ತಿಂಗಳ ಬಳಿಕ ಮುಖ್ಯ ರಸ್ತೆಗೆ ಇರಿಸಿದ್ದ ಬ್ಯಾರಿಕೇಡ್ ತೆಗೆದಿದ್ದರು. ಇದೀಗ ಮತ್ತೆ ಮಳೆಗಾಲ ಪ್ರಾರಂಭಗೊಂಡಿದ್ದು, ಮುಖ್ಯ ರಸ್ತೆ ಬಂದ್ ಮಾಡಲಾಗಿದ್ದು, ತಾತ್ಕಾಲಿಕ ರಸ್ತೆಯಲ್ಲಿ ವಾಹನ ಸಂಚಾರ ನಡೆಯುತ್ತಿದೆ.


ಕಳೆದ ವರ್ಷವೇ ಕೊಯನಾಡಿನ ಈ ಸ್ಥಳದಲ್ಲಿ ಹೆದ್ದಾರಿ ಕುಸಿದಿದ್ದರೂ, ಹೆದ್ದಾರಿ ಇಲಾಖೆ ಮಾತ್ರ ತನಗೆ ಸಂಬಂಧವೇ ಇಲ್ಲವೆಂಬಂತೆ ಕೈಕಟ್ಟಿ ಕುಳಿತಂತೆ ಕಂಡುಬರುತ್ತಿದೆ.