ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

0

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ, ದೈಹಿಕ ಶಿಕ್ಷಣ ವಿಭಾಗ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಆ. 29ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್(ರಿ) ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಉದ್ಘಾಟಿಸಿ ಮಾತನಾಡಿ, ಕ್ರೀಡಾ ಕ್ಷೇತ್ರದಲ್ಲಿ ನಮ್ಮ ದೇಶದ ಸಾಧನೆಗಳನ್ನು ಕೊಂಡಾಡಿದರು ಮತ್ತು ಶಿಕ್ಷಣದ ಜೊತೆಗೆ ಕ್ರೀಡೆಯು ದೈಹಿಕ ಮತ್ತು ಮಾನಸಿಕ ಸ್ಥೈರ್ಯವನ್ನು ಹೆಚ್ಚಿಸುವಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದರು.

ವೇದಿಕೆಯಲ್ಲಿ ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀಮತಿ ರತ್ನಾವತಿ ಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕಿ ಡಾ. ಮಮತಾ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಗೆ ಹಾಗೂ ದೈಹಿಕ ಶಿಕ್ಷಣ ವಿಭಾಗದಲ್ಲಿ ಅತ್ಯಮೂಲ್ಯ ಕೊಡುಗೆಯನ್ನು ನೀಡಿದ ನೆಹರು ಮೆಮೋರಿಯಲ್ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಧಾಕೃಷ್ಣ ಮಾಣಿಬೆಟ್ಟು, ಮಾಜಿ ರಾಷ್ಟೀಯ ವೈಟ್ ಲಿಫ್ಟರ್ ರಮೇಶ್ ಎ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದೊಡ್ಡಣ್ಣ ಬರೆಮೇಲು ಈ ಮೂವರು ಸಾಧಕರನ್ನು ಸನ್ಮಾನಿಸಲಾಯಿತು.

ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಆ. 28ರಂದು ನೆಹರು ಮೆಮೋರಿಯಲ್ ಕಾಲೇಜು ಮತ್ತು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ 5 ಕಿ.ಮೀ ಗುಡ್ಡಗಾಡು ಓಟದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಸೀತಾರಾಮ ಎಂ.ಡಿ, ಸ್ವಾಗತಿಸಿ, ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಕೃಪಾ ಎ.ಎನ್ ವಂದಿಸಿದರು. ಆಂಗ್ಲಭಾಷಾ ವಿಭಾಗ ಮುಖ್ಯಸ್ಥರಾದ ಶ್ರೀಮತಿ ಭವ್ಯ ಪಿ.ಎಂ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಬೋಧಕ/ಬೋಧಕೇತರ ವೃಂದ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.