ಸಂಪನ್ನಗೊಂಡ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಪ್ರತಿಷ್ಠಾ ಕಾರ್ಯಕ್ರಮ

0

ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಂಬಂಧಪಟ್ಟ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಪ್ರತಿಷ್ಠಾ ಕಾರ್ಯಕ್ರಮ ಸೋಮವಾರ ನಡೆಯಿತು.

ಪ್ರಾತಃಕಾಲ 6 ಕ್ಕೆ ಸರ್ವ ವಿಘ್ನಗಳ ಪರಿಹಾರಕ್ಕಾಗಿ ಗಣಪತಿ ಹವನ ಹಾಗೂ ಕಲಶ ಪೂಜೆ ನಡೆಯಿತು. ನಂತರ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿ ಅವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು.ಬಳಿಕ ವೃಷಭ ಲಗ್ನದ ಸುಮುಹೂರ್ತದಲ್ಲಿ ತಂತ್ರಿಗಳ ನೇತ್ರತ್ವದಲ್ಲಿ ಶ್ರೀ ದೈವದ ಪ್ರತಿಷ್ಠೆ, ಗುಳಿಗ ದೈವದ ಪ್ರತಿಷ್ಠೆ ಹಾಗೂ ಕಲಶಾಭಿಷೇಕ ಕಾರ್ಯಕ್ರಮ ನಡೆಯಿತು.

ಪ್ರತಿಷ್ಠಾ ವಿಧಿ ವಿಧಾನಗಳ ಬಳಿಕ ಊರಿನ ಮಹಾವಿಷ್ಣು ಭಜನಾ ಸಂಘ ಹಾಗೂ ಅಯ್ಯಪ್ಪ ಸ್ವಾಮಿ ಭಜನಾ ಸಂಘಗಳ ತಂಡದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಮಂಡೆಕೋಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ, ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಮಾಸ್ತರ್, ಗೌರವಾಧ್ಯಕ್ಷ ಪುಂಡರೀಕ ಹೆಬ್ಬಾರ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ, ಪ್ರಧಾನ ಕಾರ್ಯದರ್ಶಿ ಸುರೇಶ್ ಕಣೆಮರಡ್ಕ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಮೇದಪ್ಪ ಗೌಡ ಬೊಳುಗಲ್ಲು, ಮೋಹಿನಿ ಬಿ, ಚಂದ್ರಶೇಖರ್ ಪೆರಾಜೆ, ದಿವ್ಯಮಣಿ ಕೇನಾಜೆ, ವೈದಿಕ ಸಮಿತಿಯ ಸಂಚಾಲಕ ಎ.ಕೆ ಮಣಿಯಾಣಿ, ಮಾತೃ ಸಮಿತಿ ಸಂಚಾಲಕಿ ವಿನುತಾ ಪಾತಿಕಲ್ಲು, ಹಿರಿಯರಾದ ಬಟ್ಯಪ್ಪ ಮಣಿಯಾಣಿ, ಅಡೂರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಏವಂದೂರು ಗೋಪಾಲ ಮಣಿಯಾಣಿ ಸೇರಿದಂತೆ ಹಲವು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.