ಮುಂದಿನ ಪೀಳಿಗೆಗೆ ಸಂಸ್ಕೃತಿ ಪರಿಚಯಿಸಲು ಸದಾನಂದ ಮಾವಜಿ ಕರೆ
ಮೈಸೂರು: ಅರೆಭಾಷೆ ಸಂಸ್ಕೃತಿ ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಿ, ಅವರು ಅವುಗಳನ್ನು ಅನುಸರಿಸಿ ಮುನ್ನಡೆಯುವಂತೆ ಹಿರಿಯರು ಪ್ರೇರಣೆ ನೀಡಬೇಕೆಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಕರೆ ನೀಡಿದ್ದಾರೆ.
















ಅವರು ಮೈಸೂರಿನ ಕೊಡಗು ಗೌಡ ಸಮಾಜದಲ್ಲಿ ಏರ್ಪಡಿಸಿದ್ದ ಕೈಲ್ ಮುಹೂರ್ತ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ಯುವ ಪೀಳಿಗೆ ನಮ್ಮ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಪ್ರೀತಿ ಬೆಳೆಸಿಕೊಂಡಾಗ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಮತ್ತೊಬ್ಬ ಮುಖ್ಯ ಅತಿಥಿ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಮಾತನಾಡಿ, ನಮ್ಮ ಸಾಂಪ್ರದಾಯಿಕ ಆಚರಣೆಗಳನ್ನು ಕೇವಲ ಸಾಂಕೇತಿಕವಾಗಿ ಮಾತ್ರ ಆಚರಣೆ ಮಾಡದೆ, ಮನೆ ಮನೆಗಳಲ್ಲೂ ಆಚರಣೆ ಮಾಡಿದಾಗ ಸಂಸ್ಕೃತಿ ಗಟ್ಟಿಯಾಗಿ ಉಳಿಯಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.
ಇನ್ನೋರ್ವ ಅತಿಥಿಯಾಗಿದ್ದ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಚಂದ್ರಾವತಿ ಬಡ್ಡಡ್ಕ ಅವರು ಮಾತನಾಡಿ, ಅರೇಭಾಷೆಯನ್ನು ಉಳಿಸಿ ಬೆಳೆಸಲು ಅಕಾಡೆಮಿಯು ಶಾಲಾ ಕಾಲೇಜುಗಳಲ್ಲಿ ಅರೇ ಭಾಷೆ ಸಂಘಗಳನ್ನು ಸ್ಥಾಪಿಸುವ ಮೂಲಕ ಪ್ರಯತ್ನ ಪಡುತ್ತಿದೆ, ಅಲ್ಲದೆ ವಿವಿಧ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆಯನ್ನು ಬೆಳೆಸಲು ಪ್ರಯತ್ನ ಪಡಲಾಗುತ್ತಿದೆ, ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದಿಂದ ಮೈಸೂರಿನಲ್ಲೂ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮೈಸೂರು ಕೊಡಗು ಗೌಡ ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ ಅವರು ಮಾತನಾಡಿ, ಪ್ರಾಚೀನ ಕಾಲದಲ್ಲಿ ಕೊಡಗಿನಲ್ಲಿ ಕೃಷಿ ಚಟುವಟಿಕೆ ಮುಗಿದ ನಂತರ ಆಚರಿಸುತ್ತಿದ್ದ ಕೈಲು ಮುಹೂರ್ತ ಹಬ್ಬದ ವೈಶಿಷ್ಟತೆಯನ್ನು ಸಭೆಗೆ ವಿವರಿಸಿದರು. ಸಮಾಜದ ಹಿರಿಯರು ಆಚರಿಸಿಕೊಂಡು ಬಂದ ಸಂಸ್ಕೃತಿ ಆಚಾರ ವಿಚಾರಗಳನ್ನು ಮುಂದಿನ ತಲೆಮಾರಿಗೆ ಪರಿಚಯಿಸಲು ಇಂತಹ ಕಾರ್ಯಕ್ರಮಗಳನ್ನು ಪ್ರತಿ ವರ್ಷವೂ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಅರೆಭಾಷೆ ಅಕಾಡೆಮಿ ಅಧ್ಯಕ್ಷತೆ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಮೈಸೂರು ಕೊಡಗು ಗೌಡ ಸಮಾಜದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರನ್ನು ಹಾಗೂ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಅವರುಗಳನ್ನು ಸನ್ಮಾನಿಸಲಾಯಿತು.
ಮೈಸೂರು ಕೊಡಗು ಗೌಡ ಸಮಾಜದ ಕಾರ್ಯದರ್ಶಿ ಪೊನ್ನೆಟಿ ನಂದ ಅವರು ಸ್ವಾಗತಿಸಿ, ಮೈಸೂರಿನ ಕೊಡಗು ಮತ್ತು ದಕ್ಷಿಣ ಕನ್ನಡ ಮಹಿಳಾ ಒಕ್ಕೂಟದ ಅಧ್ಯಕ್ಷ ನಡುವಟ್ಟಿ ರ ಗೀತಾ ಲಕ್ಷ್ಮಣ ವಂದಿಸಿದರು. ಸಮಾಜದ ನಿರ್ದೇಶಕ ಪಟ್ಟಡ ಶಿವಕುಮಾರ್ ಕಾರ್ಯಕ್ರಮ ನಿರೂಪಿಸಿದರು.










